Ganesha Chaturthi: ಗಣೇಶ ಚತುರ್ಥಿ, ಬೆಳಗಾವಿಯಲ್ಲಿ ಸಿದ್ಧತೆ ಹೇಗಿದೆ?

Arun Kumar
0

ಬೆಳಗಾವಿ, ಸೆಪ್ಟೆಂಬರ್ 02: ಗಣೇಶ ಚತುರ್ಥಿ 2024ರ ತಯಾರಿ ಜೋರಾಗಿದೆ. ಬೆಳಗಾವಿಯಲ್ಲಿಯೂ ಹಬ್ಬದ ತಯಾರಿ ಬಗ್ಗೆ ಜಿಲ್ಲಾಡಳಿತ ಪರಿಶೀಲನೆ ನಡೆಸಿದೆ. ಗಣೇಶೋತ್ಸವ ಮಂಡಳಿಗಳಿಗೆ ಅನುಕೂಲವಾಗುವಂತೆ ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದ್ದಾರೆ. ಗಣೇಶಮೂರ್ತಿಗಳ ವಿಸರ್ಜನೆ ಮಾರ್ಗ, ಸ್ಥಳದ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳು, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು, ಪೊಲೀಸ್ ಆಯುಕ್ತರು ಗಣೇಶೋತ್ಸವದ ಕುರಿತು ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯ ಬಳಿಕ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೇತೃತ್ವದಲ್ಲಿ ನಗರದ ಕಪಿಲೇಶ್ವರ ಹೊಂಡಕ್ಕೆ ಭೇಟಿ ನೀಡಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪರಿಶೀಲಿಸಿದರು, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಹೆಸ್ಕಾಂ, ಪೊಲೀಸ್, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಆಯಾ ಪೊಲೀಸ್ ಠಾಣೆಯ ಏಕಗವಾಕ್ಷಿ ಕೇಂದ್ರದಲ್ಲಿ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಉಪಸ್ಥಿತರಿದ್ದು, ಅಗತ್ಯ ಅನುಮತಿಯನ್ನು ನೀಡಲಿದ್ದಾರೆ ಎಂದರು.

ಅಧಿಕಾರಿಗಳಿಗೆ ಸೂಚನೆ ಏನು?; ಗಣೇಶೋತ್ಸವದ ತಯಾರಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಏಕಗವಾಕ್ಷಿ ತಂಡಗಳಿಗಾಗಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಗಣೇಶ ಮಂಟಪಗಳನ್ನು ನಿರ್ಮಿಸಬೇಕು. ಸಾರ್ವಜನಿಕರ ಸಂಚಾರಕ್ಕೆ, ಮಹಾನಗರ ಪಾಲಿಕೆಯ ಕಸ ವಿಲೇವಾರಿ ಹಾಗೂ ಅಂಬ್ಯುಲೆನ್ಸ್ ಸಂಚಾರಕ್ಕೆ ತೊಂದರೆಯಾಗದಂತೆ ಮಂಟಪದ ಅಳತೆಯು ಮಿತಿಯೊಳಗೆ ಇರುವಂತೆ ನಿಗಾವಹಿಸಬೇಕು ಎಂದು ಸೂಚನೆ ನೀಡಲಾಯಿತು.

ಗಣೇಶ ಮೂರ್ತಿಗಳ ಆಗಮನ ಹಾಗೂ ವಿಸರ್ಜನೆ ಸಂದರ್ಭದಲ್ಲಿ ರಸ್ತೆಯಲ್ಲಿನ ವಿದ್ಯುತ್ ಹಾಗೂ ವಿವಿಧ ದೂರ ಸಂಪರ್ಕ ಕೇಬಲ್ಗಳನ್ನು ಮೇಲುಸ್ಥರಕ್ಕೆ ಎತ್ತರಿಸಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ ವತಿಯಿಂದ ರೆಂಬೆಗಳನ್ನು ಕತ್ತರಿಸಲು ಕ್ರಮವಹಿಸಬೇಕು. ಹೆಸ್ಕಾಂ, ಪೊಲೀಸ್, ಪಾಲಿಕೆ, ಅರಣ್ಯ, ಅಗ್ನಿಶಾಮಕ, ಬಿಎಸ್ಎನ್ಎಲ್ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಮೆರವಣಿಗೆ ಮಾರ್ಗದಲ್ಲಿ ಜಂಟಿಯಾಗಿ ಸಮೀಕ್ಷೆ ಜರುಗಿಸಿ ನಿಖರವಾದ ವರದಿಯನ್ನು ಒದಗಿಸಲು ನಿರ್ದೇಶನ ನೀಡಲಾಯಿತು.

ಪಾಲಿಕೆ ವತಿಯಿಂದ ಗಣೇಶ ಆಗಮನ ಹಾಗೂ ವಿಸರ್ಜನೆ ಮಾರ್ಗದಲ್ಲಿನ ರಸ್ತೆ ದುರಸ್ತಿಗೆ ಕ್ರಮ ವಹಿಸಬೇಕು. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ವಹಿಸಿ, ಕತ್ತಲೆ ಹೆಚ್ಚಿರುವ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಕಣ್ಗಾವಲು ಸ್ಥಾವರ ಹಾಗೂ ಸಾರ್ವಜನಿಕರ ಗ್ಯಾಲರಿ ನಿರ್ಮಾಣಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಗರದಲ್ಲಿ ಬಂಟ್ಟಿಂಗ್ಸ್, ಬ್ಯಾನರ್ ಅಳವಡಿಕೆ ಕುರಿತು ನೀಡಲಾಗುವ ಅನುಮತಿಗಳ ವಿವರಗಳನ್ನು ಪೊಲೀಸ್ ಇಲಾಖೆಗೆ ನೀಡಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಪಿಓಪಿ ಗಣೇಶ ಮೂರ್ತಿಗಳ ಬಳಸದಂತೆ ಪಾಲಿಕೆಯ ವಾಹನಗಳಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, "ಪೊಲೀಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳು ಜಂಟಿಯಾಗಿ ನಗರದಲ್ಲಿ ಸಂಚರಿಸಿ ಗಣೇಶ ಪ್ರತಿಷ್ಠಾನ ಮಂಟಪಗಳ ಹಾಗೂ ಮೆರವಣಿಗೆಯ ಸ್ಥಳಗಳ ಕುರಿತು ಸಮೀಕ್ಷೆ ನಡೆಸಲು" ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿಸಿಪಿ ರೋಹನ ಜಗದೀಶ, ಎಸಿಪಿ ಶ್ರೀಕಾಂತ ಕಟ್ಟಿಮನಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ ಸೇರಿದಂತೆ ಹೆಸ್ಕಾಂ, ಪೊಲೀಸ್, ಅರಣ್ಯ, ಅಗ್ನಿಶಾಕಮ ದಳ, ಆರೋಗ್ಯ, ಕಂದಾಯ, ಬಿಎಸ್ಎನ್ಎಲ್, ಮಹಾನಗರ ಪಾಲಕೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಈ ಸಭೆಯ ಬಳಿಕ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಗರದ ಕಪಿಲೇಶ್ವರ ಹೊಂಡಕ್ಕೆ ಭೇಟಿ ನೀಡಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪರಿಶೀಲಿಸಿದರು. ಪ್ರತಿವರ್ಷದಂತೆ ಸ್ವಚ್ಛತೆ, ಬೆಳಕಿನ ವ್ಯವಸ್ಥೆ, ಭದ್ರತೆ ಮತ್ತಿತರ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ನಿರ್ದೇಶಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)